ಭ್ರಷ್ಟಾಚಾರ ಮತ್ತು ಭೂ ಹಗರಣದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಪುಟದ ಕೆಲವು ಸಚಿವರ ರಾಜೀನಾಮೆಗೆ ಪ್ರಸಕ್ತ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು. ಅಲ್ಲದೆ, ಮತ್ತಷ್ಟು ಹಗರಣಗಳನ್ನು ಬಯಲಿಗೆಳೆಯುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಭೂ ಹಗರಣದ ರೈತರ ಭೂ ಸ್ವಾಧೀನ, ಕೆಐಎಡಿಬಿ ಹಗರಣ, ಸ್ವಜನ ಪಕ್ಷಪಾತ ಮುಂತಾದ ವಿಷಯಗಳ ಬಗ್ಗೆ ಕಾಂಗ್ರೆಸ್ ಪಕ್ಷ ಸದನದಲ್ಲಿ ಹೋರಾಟ ನಡೆಸಲಿದೆ. ಈ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ರೇವಣ್ಣ ಹಾಗೂ ಮೇಲ್ಮನೆ ಪ್ರತಿಪಕ್ಷದ ಜೆಡಿಎಸ್ ನಾಯಕ ನಾಣಯ್ಯ ಅವರ ಜತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಅಧಿವೇಶನದಲ್ಲಿ ನಡೆಸಬೇಕಾದ ಹೋರಾಟದ ರೂಪುರೇಶೆ ಮುಂತಾದ ವಿಷಯಗಳ ಬಗ್ಗೆ ಜೆಡಿಎಸ್ ಪಕ್ಷದ ಜತೆ ಸಮಗ್ರ ಚರ್ಚೆ ನಡೆಸಲು ಜನವರಿ 5ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಅಂದು ಸವಿವರವಾಗಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.
ಜೆಡಿಎಸ್ ಸಹಕಾರದ ಕುರಿತು ಕುಮಾರಸ್ವಾಮಿ ಅವರೊಂದಿಗೆ ಮಾತನಾಡುವ ಪ್ರಮೇಯವಿಲ್ಲ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸುತ್ತೇವೆ ಎಂದರು.