ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದು, ವಿರೋಧ ಪಕ್ಷಗಳಿಗೆ ಬೆಂಬಲ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.
ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ 12 ಜಿಲ್ಲಾ ಪಂಚಾಯಿತಿಗಳಲ್ಲಿ ಮಾತ್ರ ಅಧಿಕಾರ ಹಿಡಿದಿದೆ. ಉಳಿದ 18 ಜಿಲ್ಲೆಗಳಲ್ಲಿ ವಿರೋಧ ಪಕ್ಷಗಳ ಕೈ ಮೇಲಾಗಿದೆ. ಆಡಳಿತ ಪಕ್ಷವನ್ನು ಜನತೆ ತಿರಸ್ಕರಿಸಿರುವುದು ಫಲಿತಾಂಶದಲ್ಲಿ ಸ್ಪಷ್ಟವಾಗಿದೆ ಎಂದರು.
ಈಗ ನಾಲ್ಕು ಜಿಲ್ಲಾ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ. ಏಳು ಜಿಲ್ಲಾ ಪಂಚಾಯಿತಿಗಳಲ್ಲಿ ಜೆಡಿಎಸ್ ಜತೆಗೂಡಿ ಅಧಿಕಾರ ಹಿಡಿಯಬಹುದು. ಜೆಡಿಎಸ್ ಕೂಡ ನಾಲ್ಕು ಕಡೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನೆರವಿನಿಂದ ಇನ್ನೂ ಆರು ಕಡೆ ಅಧಿಕಾರ ಪಡೆಯಬಹುದು ಎಂದು ಹೇಳಿದರು.
ತವರು ಕ್ಷೇತ್ರದಲ್ಲೇ ಪರಮೇಶ್ವರ್ಗೆ ಮುಖಭಂಗ: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇಲ್ಲಿ ಜೆಡಿಎಸ್ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡು ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರ ಉಳಿಸಿಕೊಂಡಿದ್ದರೆ, ಬಿಜೆಪಿ 13 ಸ್ಥಾನ ಗೆದ್ದು ತನ್ನ ಶಕ್ತಿ ಪ್ರದರ್ಶಿಸಿದೆ. ಇದುವರೆಗೆ 13 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈ ಬಾರಿ ಕೇವಲ 10 ಸ್ಥಾನ ಗೆದ್ದು ತನ್ನ ಶಕ್ತಿಯನ್ನು ಕುಗ್ಗಿಸಿಕೊಂಡಿದೆ.
ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರದಲ್ಲಿ ಕೇವಲ ಒಂದು ಜಿ.ಪಂ.ಸ್ಥಾನಕ್ಕೆ ಕಾಂಗ್ರೆಸ್ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ತಾಲೂಕು ಪಂಚಾಯಿತಿಯಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.